ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಕರೆಯುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ವಿಚಾರಣೆ ಪೂರ್ಣಗೊಳ್ಳುವವರೆಗೂ ಕಾಂಗ್ರೆಸಿಗರು ಮೌನ ಧರಣಿ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ಜುಲೈ 26ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ನೀಡಲಾಗಿದೆ. ವಿಚಾರಣೆ ಶುರುವಾದ ಸಮಯದಲ್ಲಿ ಕಾಂಗ್ರೆಸ್ನವರು ಬೆಂಗಳೂರಿನಲ್ಲಿ ಮೌರ್ಯ ಸರ್ಕಲ್ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮೌನ ಸತ್ಯಾಗ್ರಹ ನಡೆಸಲಿದ್ದಾರೆ. ವಿಚಾರಣೆ ಪೂರ್ಣಗೊಂಡು ಸೋನಿಯಾ ಗಾಂಧಿ ಅವರನ್ನು ವಾಪಸ್ ಕಳುಹಿಸುವವರೆಗೂ ನಾವು ಧರಣಿ ಮುಂದುವರೆಸುತ್ತೇವೆ. ಪ್ರತಿಭಟನೆಯಲ್ಲಿ ಪಕ್ಷದ ಶಾಸಕರು, ಮುಖಂಡರು, ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಭಾಗವಹಿಸುತ್ತಾರೆ ಎಂದು ತಿಳಿಸಿದರು.
ಈ ಮೊದಲು ಜಾರಿ ನಿರ್ದೇಶನಾಲಯ ನಮ್ಮ ತಾಯಿಯವರಿಗೂ ಸಮನ್ಸ್ ನೀಡಿತ್ತು. ಅದನ್ನು ನಾನು ಕೋರ್ಟ್ನಲ್ಲಿ ಪ್ರಶ್ನಿಸಿದ್ದರಿಂದ ನ್ಯಾಯಾಲಯದ ಸೂಚನೆ ಮೇರೆಗೆ ಅಧಿಕಾರಿಗಳು ಮನೆಗೆ ಬಂದು ಹಿರಿಯರಾದ ನಮ್ಮ ತಾಯಿಯನ್ನು ವಿಚಾರಣೆ ನಡೆಸಿದ್ದರು.
ಸೋನಿಯಾ ಗಾಂಧಿ ಅವರು ನ್ಯಾಯಾಲಯಕ್ಕೆ ಹೋಗದೆ ನೇರವಾಗಿ ಕಚೇರಿಗೆ ಹೋಗಿ ವಿಚಾರಣೆ ಎದುರಿಸಿದ್ದಾರೆ. ಆದರೂ ಮತ್ತೊಮ್ಮೆ ಅವರಿಗೆ ಸಮನ್ಸ್ ನೀಡಿರುವುದು ಖಂಡನೀಯ ಎಂದರು.
ಭಾರತ್ ಜೋಡೋ ಯಾತ್ರೆ…
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆ ಚಾಮರಾಜನಗರದ ಮೂಲಕ ರಾಜ್ಯಕ್ಕೆ ಪ್ರವೇಶಿಸಲಿದ್ದು, ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ, ಪಾಂಡುಪುರದ ಮೂಲಕ ತುಮಕೂರು ಪ್ರವೇಶಿಸಲಿದೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ