ಮೈಸೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಂಬೈನಲ್ಲಿ ತೀರ್ಮಾನ ಆಗಲಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಶುಕ್ರವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೈಸೂರಿಗೆ ಬಂದಿರುವುದು ಸುತ್ತೂರು ಶ್ರೀಗಳನ್ನು ಭೇಟಿ ಮಾಡಲು. ಮುಖ್ಯಮಂತ್ರಿಗಳ ಭೇಟಿ ವಿಚಾರ ನನಗೆ ಗೊತ್ತಿಲ್ಲ. ನಾನು ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ದೈವಾಧೀನರಾದ ಕಾರಣ ಅವರನ್ನು ಭೇಟಿ ಮಾಡಲು ಇಲ್ಲಿಗೆ ಬಂದಿದ್ದೇನೆ ಎಂದು ತಿಳಿಸಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ತಂದವನು ನಾನು. ಸಚಿವ ಸ್ಥಾನ ಕೇಳುತ್ತೇನೆ. ಆದರೆ ಸಚಿವ ಸ್ಥಾನಕ್ಕಾಗಿ ನಾನು ಸ್ವಾಮೀಜಿ ಅವರನ್ನು ಭೇಟಿ ಮಾಡುತ್ತಿಲ್ಲ. ರಾಜೀನಾಮೆ ವಿಚಾರ ಮುಂಬೈನಲ್ಲಿ ಹೋಗಿ ಮಾತಾಡುತ್ತೇನೆ ಎಂದು ತಿಳಿಸಿದರು.
ಸುತ್ತೂರು ಮಠಕ್ಕೆ ಭೇಟಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ತನ್ನ ಸಹೋದರನ ಜೊತೆ ವಿಶೇಷ ವಿಮಾನದ ಮೂಲಕ ನಗರದ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ.
ಸಹೋದರ ಲಖನ್ ಜಾರಕಿಹೊಳಿ, ಅಳಿಯ ಅಂಬಿರಾವ್ ಪಾಟೀಲ್ ಅವರೊಟ್ಟಿಗೆ ಬೆಳಗಾವಿ ಸಾಂಬ್ರಾದಿಂದ ವಿಮಾನದ ಮೂಲಕ ಮೈಸೂರಿಗೆ ಬಂದರು.
ನಿಮ್ಮ ಕಾಮೆಂಟ್ ಬರೆಯಿರಿ