ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದಯ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಸೋಮವಾರ ನಡೆಸಿದರು.
ನ್ಯಾಯಾಲಯವು ಮಧ್ಯಂತರ ಮತ್ತು ಸಾಮಾನ್ಯ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ತನಿಖಾ ದಳದ ವಿಶೇಷ ಸರ್ಕಾರಿ ಅಭಿಯೋಜಕರಿಗೆ ನೋಟಿಸ್ ಜಾರಿ ಮಾಡಿತು.
ಅರ್ಜಿದಾರ ಭವಾನಿ ರೇವಣ್ಣ ಪರ ವಕೀಲರು “ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ ಎಸ್ಐಟಿ ಜಾರಿ ಮಾಡಿರುವ ನೋಟಿಸ್ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ, ಅರ್ಜಿದಾರರಿಗೆ ಬಂಧನ ಭೀತಿ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಜ್ವಲ್ ಮತ್ತು ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಾಧ್ಯಮಗಳು ಬಿಂಬಿಸಿವೆ. ಎಸ್ಐಟಿಯು ಮಾಧ್ಯಮಗಳು ಬಿಂಬಿಸಿದಂತೆ ಯಾವುದೇ ತೆರನಾದ ನೋಟಿಸ್ ಜಾರಿ ಮಾಡಿಲ್ಲ. ಮಾಧ್ಯಮಗಳ ವರದಿಯಿಂದ ತನಿಖಾ ಸಂಸ್ಥೆಯು ಬಂಧಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರುತ್ತಿರುವುದಾಗಿ ತಿಳಿಸಿದ್ದಾರೆ.
ಪ್ರಕರಣ ಏನು..?
ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ ಆರ್ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 364ಎ, 365 ಮತ್ತು 34ರ ಅಡಿ ಎಫ್ಐಆರ್ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ ಎಚ್.ಡಿ. ರೇವಣ್ಣ ಮೊದಲ ಆರೋಪಿಯಾಗಿದ್ದು, ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಈಗ ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ