ಮಹಾರಾಷ್ಟ್ರದಲ್ಲಿ ಮಳೆ | ಉಕ್ಕಿ ಹರಿದ ಘಟಪ್ರಭಾ ; ಗೋಕಾಕದಲ್ಲಿ ಪ್ರವಾಹ : ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಗೋಕಾಕ ಪಟ್ಟಣದಲ್ಲಿ ಪ್ರವಾಹ ಉಂಟಾಗಿದೆ, ನೂರಕ್ಕೂ ಹೆಚ್ಚು ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ.
ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಕೃಷ್ಣೆ ತುಂಬಿ ಹರಿಯುತ್ತಿದೆ. ಘಟಪ್ರಭೆ ಕೂಡ ಅಬ್ಬರಿಸುತ್ತಿದ್ದು, ೬೦ ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಘಟಪ್ರಭಾ ನದಿಗೆ ಹರಿದು ಬರುತ್ತಿದ್ದು, ಗೋಕಾಕದಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಗೋಕಾಕ ನಗರ ನಗರದ ಐದಾರು ಕಾಲೋನಿಗಳು ನೀರಿನಿಂದ ಜಲಾವೃತವಾಗಿವೆ, ಜನಜೀವನ ಅಸ್ತವ್ಯಸ್ತಗೊಂಡಿದೆ.

ಗೋಕಾಕ ನಗರದ ಉಪ್ಪಾರ ಗಲ್ಲಿ, ಬೋಜಗಾರ ಗಲ್ಲಿ, ದಾಳಂಬರಿತೋಟ, ಹಳೆ ದನದ ಪೇಟೆ ಸೇರಿ ಮತ್ತಿತರ ಪ್ರದೇಶಗಳ ಮನೆಗಳಿಗೆ ಮಂಗಳವಾರ ಮಧ್ಯರಾತ್ರಿಯೇ ನೀರು ನುಗ್ಗಿದೆ. ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆಯೇ ಪಾತ್ರೆ, ಪಗಡೆ, ಗ್ಯಾಸ್, ಸಿಲಿಂಡರ್, ಬಟ್ಟೆ-ಬರೆಗಳನ್ನು ಕಟ್ಟಿಕೊಂಡು ಅನೇಕರು ಜಿಲ್ಲಾಡಳಿತ ಮುನ್ಸಿಪಲ್ ಶಾಲೆಯಲ್ಲಿ ಸ್ಥಾಪಿಸಿರುವ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ.

https://x.com/i/status/1958034881071518033

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮನೆಗೆ ನೀರು ನುಗ್ಗಿರುವ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ವ್ಯವಸ್ಥೆ ಕಲ್ಪಿಸಿದ್ದೇವೆ. ಕಾಳಜಿ ಕೇಂದ್ರದಲ್ಲಿ 200 ಕುಟುಂಬಗಳನ್ನು ಸೇರಿಸಲಾಗಿದ್ದು, ಇವರಲ್ಲಿ ಇದ್ದ ಇಬ್ಬರು ಗರ್ಭಿಣಿಯರು, ಮೂವರು ಬಾಣಂತಿಯರನ್ನು ಗೋಕಾಕ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 12 ಚಿಕ್ಕಮಕ್ಕಳಿಗೆ ತೊಂದರೆ ಆಗದಂತೆ ಪ್ರತ್ಯೇಕ ವ್ಯವಸ್ಥೆ ನೀಡಲಾಗಿದೆ ಎಂದು ತಿಳಿಸಿದರು.
ಕಾಳಜಿ ಕೇಂದ್ರದಲ್ಲಿ ಊಟ, ವಸತಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಉತ್ತಮ ವ್ಯವಸ್ಥೆ ಮಾಡಿದ್ದೇವೆ. ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಇಲ್ಲಿನ ಶಾಸಕರ ಜೊತೆಗೆ ಚರ್ಚಿಸಿ ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement