ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕೇಂದ್ರ ಚುನಾವಣಾ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅದಕ್ಕೆ 9 ಪುಟಗಳ ಸುದೀರ್ಘ ಉತ್ತರ ನೀಡಿದ್ದಾರೆ.
ಶೋಕಾಸ್ ನೋಟಿಸ್ ಗೆ 72 ಗಂಟೆಯೊಳಗೆ ಉತ್ತರ ನೀಡುವಂತೆ ಯತ್ನಾಳ ಅವರಿಗೆ ಕೇಂದ್ರ ಚುನಾವಣಾ ಶಿಸ್ತು ಸಮಿತಿ ಸೂಚಿಸಿದ್ದ ಹಿನ್ನೆಲೆಯಲ್ಲಿ ಅವರು ನೋಟಿಸ್ ತಲುಪಿದ ನಂತರ ಕೇಂದ್ರ ಶಿಸ್ತು ಸಮಿತಿಯ ಕಾರ್ಯಕಾರಿ ಸದಸ್ಯ ಓ ಪಾಠಕ್ ಅವರಿಗೆ 9 ಪುಟಗಳ ಉತ್ತರವನ್ನು ಇ-ಮೇಲ್ ಮೂಲಕ ಕಳುಹಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ಕೇಂದ್ರ ಶಿಸ್ತು ಸಮಿತಿಗೆ ಯತ್ನಾಳ ನೀಡಿರುವ ಉತ್ತರವೇನು ಎಂಬುದರ ವಿವರ ಗೊತ್ತಾಗಿಲ್ಲ. ಆದಾಗ್ಯೂ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ ರಾಜಕೀಯ ಮಾಡುತ್ತಿದೆ. ನಾನು ಯಾವುದೇ ಬಣ ರಾಜಕೀಯ ಮಾಡಿಲ್ಲ. ಪಕ್ಷದ ಶಿಸ್ತನ್ನು ನಾನು ಉಲ್ಲಂಘಿಸಿಲ್ಲ’ ಎಂದು ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಬಿ.ವೈ.ವಿಜಯೇಂದ್ರ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಹಿರಿಯ ನಾಯಕರನ್ನು ವಿಶ್ವಾಸಕ್ಕೆ ಪಡೆಯುತ್ತಿಲ್ಲ. ಹೊಂದಾಣಿಕೆ ರಾಜಕೀಯದಿಂದ ಪಕ್ಷ ಸಂಘಟನೆ ದುರ್ಬಲವಾಗಬಾರದು. ಕಾರ್ಯಕರ್ತರು ಭಾವನೆಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದೇನೆ. ನನ್ನ ಹೇಳಿಕೆ ಪಕ್ಷದ ಅನೇಕ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಅಭಿಪ್ರಾಯವಾಗಿದೆ. ಹೀಗಾಗಿ ಸಮರ್ಥ ನಾಯಕರಿಗೆ ಜವಬ್ದಾರಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವಕ್ಫ್ ಹೋರಾಟವನ್ನು ನಾವು ಪಕ್ಷದ ವೇದಿಕೆಯಲ್ಲೇ ಮಾಡಿದ್ದೇವೆ. ಈ ಹೋರಾಟಕ್ಕೆ ಕೇಂದ್ರದ ನಾಯಕರೇ ಶ್ಲಾಘಿಸಿದ್ದಾರೆ. ಪಕ್ಷದ ಹಿತಕ್ಕೆ ನಾವು ಕೆಲಸ ಮಾಡುತ್ತಿದ್ದೇವೆ. ನಾನು ಶಿಸ್ತು ಉಲ್ಲಂಘಿಸಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಈ ಹಿಂದೆ ಕೂಡ ನೋಟಿಸ್ ನೀಡಿತ್ತು. ಕಳೆದ ಡಿಸೆಂಬರಿನಲ್ಲಿ ಅವರಿಗೆ ನೋಟಿಸ್ ನೀಡಲಾಗಿತ್ತು. ಆಗ ಖುದ್ದು ಶಿಸ್ತು ಸಮಿತಿ ಮುಂದೆ ಹಾಜರಾಗಿ ಯತ್ನಾಳ ವಿವರಣೆ ನೀಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ