1 ರಿಂದ 8 ತರಗತಿ ಆರಂಭ, ಸಾರ್ವಜನಿಕ ಗಣೇಶೋತ್ಸವ ಆಚರಣೆ: ಇಂದಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ೧ ರಿಂದ ೮ನೇ ತರಗತಿ ವರೆಗೆ ಶಾಲೆಗಳನ್ನು ಆರಂಭಿಸುವ ಬಗ್ಗೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಸಂಬಂಧ ಸರ್ಕಾರ ಇಂದು (ಆಗಸ್ಟ್‌ ೩೦ರಂದು) ತೀರ್ಮಾನ ಪ್ರಕಟಿಸಲಿದೆ.
ಈ ಸಭೆಯಲ್ಲಿ ಶಾಲೆ ಆರಂಭ ಮತ್ತು ಗಣೇಶೋತ್ಸವ ಆಚರಣೆಯ ಸಂಬಂಧ ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಕುತೂಹಲವಿದೆ. ರಾಜ್ಯದಲ್ಲಿ ಸಂಭಾವ್ಯ ಕೋವಿಡ್ ೩ನೇ ಅಲೆಯನ್ನು ತಡೆಯಲು ಕೈಗೊಳ್ಳಬೇಕಾಗಿರುವ ಬಿಗಿ ಕ್ರಮಗಳ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ತಜ್ಞರು ಹಾಗೂ ಸಚಿವರುಗಳ ಜತೆ ಸಭೆ ನಡೆಸಲಿದ್ದಾರೆ.
ನಾಳೆ ಸಂಜೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯಲಿದ್ದು, ೧ ರಿಂದ ೮ನೇ ತರಗತಿಗಳನ್ನು ಯಾವಾಗ ಆರಂಭಿಸಬೇಕು ಎಂಬ ನಿರ್ಧಾರ ಸಹ ಆಗಲಿದೆ ಎದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಬಿ.ಸಿ.ನಾಗೇಶ ತಿಳಿಸಿದ್ದಾರೆ.
ರಾಜ್ಯದಲ್ಲಿ ಆ. ೨೩ ರಿಂದ ೯ ಹಾಗೂ ೧೦ ಮತ್ತು ಪಿಯುಸಿ ತರಗತಿಗಳು ಆರಂಭವಾಗಿದ್ದು, ೧ ರಿಂದ ೮ನೇ ತರಗತಿಗಳನ್ನು ಸದ್ಯಕ್ಕೆ ಆರಂಭಿಸಬೇಕೇ ಬೇಡವೇ ಎಂಬ ಬಗ್ಗೆ ಮುಖ್ಯಮಂತ್ರಿಗಳು ಎಲ್ಲರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರದ ವರೆಗೆ ಜೋರಾಗಿ ಮಳೆ : ಮುನ್ಸೂಚನೆ

ಸಾರ್ವಜನಿಕ ಗಣೇಶೋತ್ಸವದ ಬಗ್ಗೆ ತೀರ್ಮಾನ
ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಬಗ್ಗೆಯೂ ನಾಳೆ ನಡೆಯುವ ತಜ್ಞರ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂಬ ಒತ್ತಡಗಳು ಹೆಚ್ಚಿದ್ದು, ಅದರಲ್ಲೂ ಆಡಳಿತಾರೂಢ ಬಿಜೆಪಿ ಹಲವು ಶಾಸಕರು ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿದ್ದಾರೆ.
ಹೀಗಾಗಿ ತಜ್ಞರ ಸಲಹೆ ಪಡೆದು ಈ ಕುರಿತು ನಾಳಿನ ಸಭೆಯಲ್ಲಿ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಹೇಳಿದ್ದಾರೆ.
ರಾಜ್ಯದಲ್ಲಿ ಸಂಭಾವ್ಯ ಕೊರೊನಾ ೩ನೇ ಅಲೆಯನ್ನು ತಡೆಯಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಜಾರಿಗೊಳಿಸಿದ್ದು, ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯ ಪ್ರವೇಶಿಸುವವರಿಗೆ ೭ ದಿನಗಳ ಕ್ವಾರಂಟೈನ್ ನಿಯಮವನ್ನು ಜಾರಿ ಮಾಡುವ ಬಗ್ಗೆಯೂ ತೀರ್ಮಾನಗಳು ಆಗುವ ಸಾಧ್ಯತೆಗಳಿವೆ.
ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಕೈಗೊಳ್ಳಬೇಕಾದ ಮತ್ತಷ್ಟು ಬಿಗಿ ಕ್ರಮಗಳ ಬಗ್ಗೆಯೂ ನಾಳಿನ ಸಭೆಯಲ್ಲಿ ಚರ್ಚೆಗಳು ಆಗಲಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement