ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೇನು ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಇದನ್ನು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಂತಹ ಒಪ್ಪಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.
ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಲಿ, ಹಾಗಾದ್ರೆ ಬೇರೆಯವರು ಇರೋದು ಬೇಡವಾ? ಅದೆಲ್ಲ ಆ ರೀತಿ ಆಗಲು ಸಾಧ್ಯವಿಲ್ಲ. ಈ ಬಗ್ಗೆ ದೆಹಲಿ ಮತ್ತು ರಾಜ್ಯದಲ್ಲಿ ಇಬ್ಬರು, ಮೂವರನ್ನು ಕೇಳಿದ್ದೇನೆ. ಒಪ್ಪಂದ ಆಗಿದೆ ಎಂದು ಯಾರು ಹೇಳಿಲ್ಲ. ಹೈಕಮಾಂಡ್ ಬಿಟ್ಟು ನಾವು ಹೋಗುವವರಲ್ಲ. ನಾವು ಹೈಕಮಾಂಡ್ ತೀರ್ಮಾನವನ್ನು ಒಪ್ಪಿಕೊಳ್ಳುತ್ತೇವೆ. ಒಪ್ಪಂದದ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಹೇಳಿದರು.
ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಮೇಲೆ ಸ್ವಾಭಿಮಾನಿ ಒಕ್ಕೂಟಕ್ಕೆ ಸಹಾನುಭೂತಿ ಇದೆ. ಹೀಗಾಗಿ, ಒಟ್ಟಿಗೆ ಸಮಾವೇಶ ಮಾಡಲಾಗುತ್ತಿದೆ, ಇದರಲ್ಲಿ ಯಾವುದೇ ಗೊಂದಲವಿಲ್ಲ. ಗೊಂದಲ ಇದೆ ಎಂಬಂತೆ ಕೆಲವರು ಮಾತ್ರ ಸೃಷ್ಟಿ ಮಾಡುತ್ತಿದ್ದಾರೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ