ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವ ದೆಹಲಿ; ಸಿಬಿಎಸ್‌ಇ ಹಾಗೂ ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೇ 31ಕ್ಕೆ ಮುಂದೂಡಿದೆ.
ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ಕೇಂದ್ರ ಸರ್ಕಾರ ಪರೀಕ್ಷೆ ನಡೆಸುವುದೇ ಬೇಡವೇ ಎಂಬ ಬಗ್ಗೆ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ಆಧಾರದ ಮೇಲೆ ವಿಚಾರಣೆಯನ್ನು ಬರುವ ಸೋಮವಾರ ( ಮೇ 31)ಕ್ಕೆ ಮುಂದೂಡಿದೆ.
ಪರೀಕ್ಷೆಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಇತ್ತೀಚೆಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ 12ನೇ ತರಗತಿಯವರಿಗೆ ಸದ್ಯದಲ್ಲಿಯೇ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರಕ್ಕೆ ಬರಲಾಗಿತ್ತು. ಇದೇ 30ರಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ 12ನೇ ತರಗತಿ ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.
ಶುಕ್ರವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಅರ್ಜಿಯಲ್ಲಿ, ಸಿಬಿಎಸ್‌ಇ, ಐಸಿಎಸ್‌ಇ ಮತ್ತು ಕೇಂದ್ರ ಸರ್ಕಾರದ ಸಂಸ್ಥೆಗಳು 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶವನ್ನು ನಿರ್ದಿಷ್ಟ ಸಮಯದೊಳಗೆ ಘೋಷಿಸಲು ವಸ್ತುನಿಷ್ಠ ವಿಧಾನವನ್ನು ರೂಪಿಸಬೇಕೆಂದು ಒತ್ತಾಯಿಸಲಾಗಿದೆ.
ಇತ್ತೀಚೆಗೆ 12ನೇ ತರಗತಿಯ ಸುಮಾರು 300 ವಿದ್ಯಾರ್ಥಿಗಳು ಸಹಿಯನ್ನು ಹಾಕಿದ ಪತ್ರವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎನ್ ವಿ ರಮಣ ಅವರಿಗೆ ಕಳುಹಿಸಿ, ಕೋವಿಡ್-19 ಸಾಂಕ್ರಾಮಿಕದ ನಡುವೆ ಪರೀಕ್ಷೆಯನ್ನು ಭೌತಿಕವಾಗಿ ನಡೆಸುವ ಸಿಬಿಎಸ್ ಇ ನಿರ್ಧಾರವನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದ್ದರು.

ಪ್ರಮುಖ ಸುದ್ದಿ :-   ಬೆಳಗಾವಿ ಅಗ್ನಿ ಅವಘಡ : ಗಾಯಗೊಂಡಿದ್ದ ತಂದೆ, ಮಗ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement