ಬೆಳಗಾವಿ: ಜಿಲ್ಲೆಯ ವಿವಿಧೆಡೆ ಹಾಗೂ ಪಕ್ಕದ ಮಹಾರಾಷ್ಟ್ರದಲ್ಲಿ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಸಂಕೇಶ್ವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ₹18.30 ಲಕ್ಷ ಮೌಲ್ಯದ ಒಟ್ಟು 27 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಲಕ್ಷ್ಮಣ ವಿರುಪಾಕ್ಷಿ ಕಣಬರಗಿ (31) ಹಾಗೂ ಫಕೀರಪ್ಪ ಸಿದ್ದಪ್ಪಾ ಕರಿಗಾರ (25) ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಮಾರ್ಚ್ 31ರಂದು ಅಜೀತ ಅರಬೋಳೆ ಎಂಬವರು ಸಂಕೇಶ್ವರ ಪಟ್ಟಣದಲ್ಲಿ ತಮ್ಮ ಬಜಾಜ್ ಡಿಸ್ಕವರ್ ಬೈಕ್ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದರು. ಈ ದೂರಿನನ್ವಯ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್, ಹೆಚ್ಚುವರಿ ಎಸ್.ಪಿ. ಆರ್.ಬಿ. ಬಸರಗಿ ಹಾಗೂ ಗೋಕಾಕ ಡಿ.ಎಸ್.ಪಿ. ರವಿ ಡಿ. ನಾಯ್ಕ ಅವರ ಮಾರ್ಗದರ್ಶನದಲ್ಲಿ, ಸಂಕೇಶ್ವರ ಸಿಪಿಐ ಎಸ್.ಎಂ. ಅವಜಿ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.
ಏಪ್ರಿಲ್ 2ರಂದು ಸಂಶಯದ ಮೇಲೆ ಲಕ್ಷ್ಮಣ ಮತ್ತು ಫಕೀರಪ್ಪ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಇಬ್ಬರೂ ಸರಣಿ ಕಳ್ಳತನದ ಕೃತ್ಯಗಳನ್ನು ಬಾಯ್ಬಿಟ್ಟಿದ್ದಾರೆ. ಇವರು ಸಂಕೇಶ್ವರ ಮಾತ್ರವಲ್ಲದೆ, ಬೆಳಗಾವಿ ಜಿಲ್ಲೆಯ ವಿವಿಧೆಡೆ ಹಾಗೂ ಮಹಾರಾಷ್ಟ್ರದ ಚಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಬೈಕ್ ಕಳ್ಳತನ ಮಾಡಿದ್ದಾರೆ ಎಂಬುದು ಗೊತ್ತಾಗಿದೆ.
ಆರೋಪಿಗಳಿಂದ 26 ಕಳವು ಮಾಡಿದ ಬೈಕ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ 1 ಬೈಕ್ ಸೇರಿದಂತೆ ಒಟ್ಟು 27 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಿಪಿಐ ಎಸ್.ಎಂ. ಅವಜಿ, ಪಿಎಸ್ಐ ಯು.ಎಸ್. ಶೆಟ್ಟೆನ್ನವರ, ಪಿಎಸ್ಐ ವಿಠಲ ನಾಯಿಕ, ಎಎಸ್ಐ ಎಲ್.ಎಸ್. ಖೋತ ಹಾಗೂ ಸಿಬ್ಬಂದಿಗಳಾದ ಎಸ್.ಎಲ್. ಗಳತಗಿ, ಎ.ಬಿ. ಮುರ್ಕಿಭಾವಿ ಮತ್ತು ಟೆಕ್ನಿಕಲ್ ಸೆಲ್ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಎಸ್.ಪಿ. ರಾಮರಾಜನ್ ಶ್ಲಾಘಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ