ಬೆಂಗಳೂರು: ಧಾರವಾಡ ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿದೆ.
ಈ ಪ್ರಕರದಲ್ಲಿ ತಮಗೆ ಜಾಮೀನು ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಕ್ಷೇಪಣೆ ಸಲ್ಲಿಸಿದ್ದ ಸಿಬಿಐ, ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದು, ರಾಜಕೀಯ ಕಾರಣಗಳಿಗಾಗಿ ಹತ್ಯೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಸುಳ್ಳು ಆರೋಪಿಗಳು ಬಂದು ತಾವೇ ಕೊಲೆ ಮಾಡಿರುವುದಾಗಿ ಶರಣಾಗಿದ್ದರು.
ಕೊಲೆ ನೋಡಿದ್ದ ಪ್ರತ್ಯಕ್ಷ ಸಾಕ್ಷಿಗಳನ್ನು ಅರ್ಜಿದಾರರು ಬೆದರಿಸಿ ಪ್ರಕರಣದಿಂದ ದೂರ ಉಳಿಯುವಂತೆ ನೋಡಿಕೊಂಡಿದ್ದರು. ಅದಕ್ಕೆ ಸ್ಥಳೀಯ ಪೊಲೀಸರು ಹಾಗೂ ವಿನಯ್ ಸಂಬಂಧಿಗಳು ನೆರವು ನೀಡಿದ್ದರು. ಈ ಎಲ್ಲ ಅಂಶಗಳುತನಿಖೆ ವೇಳೆ ಪತ್ತೆಯಾಗಿವೆ ಎಂದು ಸಿಬಿಐ ಆಕ್ಷೇಪಣೆ ಸಲ್ಲಿಸಿತ್ತು. ಸಿಬಿಐ ಪರ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಮಾಜಿ ಸಚಿವ ವಿನಯ್ ಕುಲಕರ್ಣಿಯ ಜಾಮೀನು ಅರ್ಜಿ ತಿರಸ್ಕರಿಸಿದೆ.
ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಳೆದ ನ. 5ರಿಂದ ಬಂಧನದಲ್ಲಿರುವ ವಿನಯ್ ಕುಲಕರ್ಣಿಗೆ ಮೊ ಧಾರವಾಡ ಹೈಕೋರ್ಟ್ ಪೀಠದಲ್ಲಿಯೂ ಜಾಮೀನು ಸಿಕ್ಕಿರಲಿಲ್ಲ. ಆ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ಮೂರನೇ ಬಾರಿ ಜಾಮೀನು ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ವಿನಯ್ ಕುಲಕರ್ಣಿ 5 ತಿಂಗಳಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.
Balachandra
ಸರಿಯಾದ ನಿರ್ಧಾರ.